masthmagaa.com:
ದುಬೈನಿಂದ ಮಂಗಳೂರಿಗೆ ಬಂದಿದ್ದ ಭಟ್ಕಳ ಮೂಲದ 22 ವರ್ಷದ ಯುವಕನಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ದೃಢಪಟ್ಟ ಪ್ರಕರಣಗಳ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಸದ್ಯ ಈ ವ್ಯಕ್ತಿಗೆ ಮಂಗಳೂರು ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಈ ವ್ಯಕ್ತಿಯ ಗಂಟಲು ದ್ರವದ ಮಾದರಿ ವರದಿ ಬಂದಿದ್ದು, ಕೋವಿಡ್-19 ದೃಢಪಟ್ಟಿದೆ.
ಮಾರ್ಚ್ 19ರಂದು ಮಂಗಳೂರಿಗೆ ಬಂದಿದ್ದ ಈ ವ್ಯಕ್ತಿಯನ್ನು ವಿಮಾನ ನಿಲ್ದಾಣದಿಂದ ನೇರವಾಗಿ ವೆನ್ಲಾಕ್ ಆಸ್ಪತ್ರೆಗೆ ಕರೆತರಲಾಗಿತ್ತು. ಕೊರೋನಾ ಸೋಂಕಿನ ಶಂಕೆ ಇದ್ದುದರಿಂದ ಗಂಟಲು ದ್ರವದ ಮಾದರಿಯನ್ನ ಪರೀಕ್ಷೆಗೆ ಕಳುಹಿಸಲಾಗಿತ್ತು ಅಂತ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.
ದುಬೈನಿಂದ ಸ್ಪೈಸ್ಜೆಟ್ ವಿಮಾನದಲ್ಲಿ ಈ ವ್ಯಕ್ತಿ ಬಂದಿದ್ದು, ಅದರಲ್ಲಿ 165 ಜನ ಪ್ರಯಾಣಿಕರಿದ್ದರು. ಅವರೆಲ್ಲರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಅಂತ ಜಿಲ್ಲಾಧಿಕಾರಿ ಹೇಳಿದ್ದಾರೆ.
-masthmagaa.com
Contact Us for Advertisement