masthmagaa.com:
ಬೆಂಗಳೂರು ಸೇರಿ ರಾಜ್ಯದಲ್ಲಿ ಮುಂಗಾರು ಮಳೆ ತನ್ನ ಅಬ್ಬರವನ್ನ ಶುರು ಮಾಡಿದೆ. ನಿನ್ನೆ ರಾತ್ರಿಯಿಂದ ರಾಜ್ಯದ ಹಲವು ಕಡೆ ಧಾರಾಕಾರ ಮಳೆ ಸುರಿದಿದ್ದು, ಬೆಳಗ್ಗೆಯೂ ಕೂಡ ಮುಂದುವರೆದಿತ್ತು. ಬೆಂಗಳೂರು ಸೇರಿ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರಗಳಲ್ಲಿಯೂ ಮಳೆಯಾಗಿದೆ. ಹಾಸನದಲ್ಲಿ ಸುರಿದ ಧಾರಾಕಾರ ಮಳೆಯಿಂದ 25ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿದೆ. ಈ ವೇಳೆ ಮಳೆ ನೀರು ನುಗ್ಗಿದ್ದರಿಂದ ಗೃಹೋಪಯೋಗಿ ವಸ್ತುಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಅನೇಕ ವಸ್ತುಗಳು ನಾಶವಾಗಿವೆ. ಮನೆಗೆ ನುಗ್ಗಿದ ನೀರು ಹೊರ ಹಾಕಲು ಜನ ಹರಸಾಹಸಪಟ್ಟಿದ್ದು, ಅಗ್ನಿಶಾಮಕ ಸಿಬ್ಬಂದಿ ಕೂಡ ನೆರವಿಗೆ ಧಾವಿಸಿದ್ದಾರೆ. ಅಂದ್ಹಾಗೆ ಇನ್ನು 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ.
-masthmagaa.com
Contact Us for Advertisement