masthamagaa.com:
ದೇಶದಲ್ಲಿ ಕೊರೋನಾ ವೈರಸ್ಗೆ ಮೊದಲ ವ್ಯಕ್ತಿ ಬಲಿಯಾದ ಬೆನಲ್ಲೇ ಜನರಲ್ಲಿ ಆತಂಕ ಹೆಚ್ಚಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೋಂಕು ಹರಡದಂತೆ ನಾನಾ ಕ್ರಮಗಳನ್ನು ಕೈಗೊಳ್ಳುತ್ತಿವೆ. ಇದರ ನಡುವೆಯೇ ಒಡಿಶಾದಲ್ಲಿ ಮುಂಜಾಗ್ರತಾ ಕ್ರಮವಾಗಿ ಮಾರ್ಚ್ 31ರವರೆಗೆ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆದ್ರೆ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ ಅಂತ ಒಡಿಶಾ ಸಿಎಂ ನವೀನ್ ಪಟ್ನಾಯಕ್ ವಿಧಾನಸಭೆಯಲ್ಲಿ ಹೇಳಿದ್ದಾರೆ. ಅಷ್ಟಕ್ಕೇ ಸೀಮಿತವಾಗದೆ ಚಿತ್ರಮಂದಿರ, ಜಿಮ್ ಹಾಗೂ ಈಜುಕೊಳಗಳನ್ನು ಕೂಡ ಮಾರ್ಚ್ 31ರವರೆಗೆ ಬಂದ್ ಮಾಡುವಂತೆ ಆದೇಶಿಸಿದ್ದಾರೆ.
ಇನ್ನು ದೆಹಲಿ, ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ಚಿತ್ರಮಂದಿರಗಳಿಗೆ ಬೀಗ ಬಿದ್ದಿವೆ. ಬೆಂಗಳೂರಿನಲ್ಲಿ 1ರಿಂದ 6ನೇ ತರಗತಿವರೆಗಿನ ಎಲ್ಲಾ ಮಕ್ಕಳಿಗೆ ರಜೆ ನೀಡಲಾಗಿದೆ. ದೇಶದಲ್ಲಿ ಇದುವರೆಗೆ 73 ಜನರಲ್ಲಿ ಕೊರೋನಾ ವೈರಸ್ ದೃಢಪಟ್ಟಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಸೋಂಕಿತರನ್ನು ತೀವ್ರ ನಿಗಾದಲ್ಲಿ ಇಡಲಾಗಿದ್ದು, ಅವರ ಸಂಪರ್ಕಕ್ಕೆ ಬಂದವರನ್ನು ಪತ್ತೆಹಚ್ಚಿ ನಿಗಾ ಇಡುವ ಕೆಲಸ ನಡೀತಿದೆ.
-masthamagaa.com
Contact Us for Advertisement