masthmagaa.com:
ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ತುಮಕೂರಿನ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಪ್ರಕಟವಾಗಿದೆ. ಎರಡೂ ಕ್ಷೇತ್ರಗಳಿಗೆ ನವೆಂಬರ್ 3ರಂದು ಮತದಾನ ನಡೆಯಲಿದ್ದು, ನವೆಂಬರ್ 10ರಂದು ಫಲಿತಾಂಶ ಹೊರಬೀಳಲಿದೆ. ಈ ಸಂಬಂಧ ಕೇಂದ್ರ ಚುನಾವಣಾ ಆಯೋಗ ಪ್ರಕಟಣೆ ಹೊರಡಿಸಿದ್ದು, ಕರ್ನಾಟಕ ಸೇರಿದಂತೆ 9 ರಾಜ್ಯಗಳ ಒಟ್ಟು 54 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3ರಂದು ಚುನಾವಣೆ ನಡೆಯಲಿದೆ.
ಕಾಂಗ್ರೆಸ್ನ ಮಾಜಿ ಶಾಸಕ ಮುನಿರತ್ನ ರಾಜೀನಾಮೆಯಿಂದ ರಾಜರಾಜೇಶ್ವರಿ ನಗರ ಕ್ಷೇತ್ರ ತೆರವಾಗಿತ್ತು. ಅದೇ ರೀತಿ ಜೆಡಿಎಸ್ ಶಾಸಕ ಬಿ. ಸತ್ಯನಾರಾಯಣ ನಿಧನದಿಂದ ಶಿರಾ ಕ್ಷೇತ್ರ ಕೂಡ ತೆರವಾಗಿತ್ತು. ಈ ಎರಡೂ ಕ್ಷೇತ್ರಗಳಿಗೀಗ ಚುನಾವಣೆ ನಡೆಯಲಿದೆ. ಶಿರಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ.ಬಿ. ಜಯಚಂದ್ರ ಕಣಕ್ಕಿಳಿದಿದ್ದಾರೆ. ಉಳಿದ ಪಕ್ಷಗಳು ತಮ್ಮ ಅಭ್ಯರ್ಥಿಯನ್ನು ಘೋಷಿಸಿಲ್ಲ. ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಪಡೆದು ಮುನಿರತ್ನ ಕಣಕ್ಕಿಳಿಯುವ ಸಾಧ್ಯತೆ ಇದೆ.
ಉಪಚುನಾವಣೆಗೆ ಸಂಬಂಧಿಸಿದಂತೆ ಅಕ್ಟೋಬರ್ 10ರಂದು ಅಧಿಸೂಚನೆ ಪ್ರಕಟವಾಗಲಿದೆ. ಅಕ್ಟೋಬರ್ 16ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ನಾಮಪತ್ರ ವಾಪಸ್ ಪಡೆಯಲು ಅಕ್ಟೋಬರ್ 19 ಕೊನೆಯ ದಿನಾಂಕವಾಗಿದೆ. ಉಪಚುನಾವಣೆ ದಿನಾಂಕ ಘೋಷಣೆಯಾಗಿರೋದ್ರಿಂದ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ.
ಇನ್ನು ಬಿಹಾರದ 1 ಲೋಕಸಭಾ ಕ್ಷೇತ್ರ ಮತ್ತು ಮಣಿಪುರದ 2 ವಿಧಾಸಭಾ ಕ್ಷೇತ್ರಗಳ ಉಪಚುನಾವಣೆ ನವೆಂಬರ್ 7ರಂದು ನಡೆಯಲಿದೆ. ಇದರ ಫಲಿತಾಂಶವೂ ನವೆಂಬರ್ 10ರಂದೇ ಹೊರಬೀಳಲಿದೆ. ಈ ಎಲ್ಲಾ ರಾಜ್ಯಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಕ್ರಮಗಳನ್ನು ಕೈಗೊಂಡು ಬೈಎಲೆಕ್ಷನ್ ನಡೆಸಬೇಕಿದೆ.
ಆದ್ರೆ ಕೊರೋನಾ ಹಾವಳಿ ಹೆಚ್ಚಿರುವ ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ತೆರವಾಗಿರುವ ಕ್ಷೇತ್ರಗಳಿಗೆ ಸದ್ಯಕ್ಕೆ ಉಪಚುನಾವಣೆ ನಡೆಸದಿರಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಈ ರಾಜ್ಯಗಳಲ್ಲಿ ಉಪಚುನಾವಣೆ ನಡೆಸಲು ಕಷ್ಟವಾಗಬಹುದು ಅಂತ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳು ಮಾಹಿತಿ ನೀಡಿದ ಹಿನ್ನೆಲೆ ಈ ರೀತಿ ಮಾಡಲಾಗಿದೆ.
-masthmagaa.com
Contact Us for Advertisement