masthmagaa.com:

‘ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಸೋಲನ್ನು ನಾವು ಒಪ್ಪಿಕೊಂಡಿದ್ದೇವೆ. ಆದ್ರೆ ಇದು ಪ್ರಜಾಪ್ರಭುತ್ವದ ಸೋಲು. ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು’ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಬಳಿಕ ಸರಣಿ ಟ್ವೀಟ್ ಮಾಡಿರುವ ಅವರು ಈ ರೀತಿ ಹೇಳಿದ್ದಾರೆ.

‘ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರರೂಢ ಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾರೆ. ಆಡಳಿತ ಪಕ್ಷದ ಶಾಸಕರಿದ್ದರೆ ತಮ್ಮ ಕ್ಷೇತ್ರಕ್ಕೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯ ಜನರಲ್ಲಿರುತ್ತದೆ. ಇದೇ ಫಲಿತಾಂಶ ಸಾಮಾನ್ಯ ಚುನಾವಣೆಯಲ್ಲಿ ನಿರೀಕ್ಷಿಸಲಾಗದು.’

‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವನ್ನು ಸ್ವೀಕರಿಸಲೇಬೇಕು. ನಾವೂ ಒಪ್ಪಿಕೊಂಡಿದ್ದೇವೆ. ಇದರಿಂದ ಪಕ್ಷದ ಕಾರ್ಯಕರ್ತರು ಕಂಗೆಡಬೇಕಾಗಿಲ್ಲ. ಇದರಿಂದ ಯಾವ ಪಕ್ಷವೂ ಬಲಶಾಲಿಯಾಗುವುದಿಲ್ಲ, ಯಾವ ಪಕ್ಷವೂ ಬಲಹೀನವಾಗುವುದಿಲ್ಲ. ಇದು ಸಮಗ್ರ ರಾಜ್ಯದ ಜನಾಭಿಪ್ರಾಯ ಅಲ್ಲ, ಇದು ಎರಡು ಸ್ಥಾನಗಳಿಗೆ ನಡೆದ ಚುನಾವಣೆ ಮಾತ್ರ.’

‘ನಾನು ಮುಖ್ಯಮಂತ್ರಿಯಾಗಿದ್ದಾಗ ಜನರಿಗೆ ಒಳ್ಳೆಯದಾಗಲಿ, ನಮ್ಮ ಶಾಸಕನೂ ರಾಜಕೀಯವಾಗಿ ಜನಪ್ರಿಯನಾಗಲಿ ಎಂದು ಆರ್.ಆರ್.ನಗರಕ್ಕೆ ಸುಮಾರು 2000 ಕೋಟಿ ರೂಪಾಯಿ ಕಾಮಗಾರಿಯನ್ನ ಮಂಜೂರು ಮಾಡಿದ್ದೆ. ಅದರ ಫಲ ನಮ್ಮ ಪಕ್ಷಕ್ಕೆ ಸಿಗಲಿಲ್ಲ, ಅವರಿಗೆ ಸಿಕ್ಕಿದೆ.’

‘ಮುನಿರತ್ನ ಅವರು ಪಕ್ಷಾಂತರ ಮಾಡಿದ ದಿನದಿಂದ ಚುನಾವಣಾ ತಯಾರಿ ಪ್ರಾರಂಭಿಸಿದ್ದರು. ನಾವು ನಮ್ಮ ಅಭ್ಯರ್ಥಿಯ ಆಯ್ಕೆಯನ್ನು ಸ್ವಲ್ಪ ತಡವಾಗಿ ಮಾಡಿದೆವು, ಇದರಿಂದಾಗಿ ಪ್ರಚಾರ ವಿಳಂಬವಾಗಿ ಪ್ರಾರಂಭಿಸಬೇಕಾಯಿತು. ಸೋಲಿಗೆ ಇದೂ ಒಂದು ಕಾರಣ ಇರಬಹುದು.’

‘ಶಿರಾದಲ್ಲಿ ಟಿ.ಬಿ.ಜಯಚಂದ್ರ ಜನತೆಯ ಬದುಕು ಉಳಿಸುವ ನದಿನೀರು ಹರಿಸಿದ್ದರು. ಬಿಜೆಪಿಯವರು ಬಂದು ಅಕ್ರಮವಾಗಿ ಸಂಪಾದಿಸಿದ್ದ ಹಣದ ಹೊಳೆ ಹರಿಸಿದ್ದರು. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾದ ಬೆಳವಣಿಗೆ. ಜನರ ಸೇವೆ ಮಾಡಿದವರನ್ನು ಜನ ಪ್ರಾಮಾಣಿಕವಾಗಿ ಗುರುತಿಸಿ ಹರಸಬೇಕು.’

‘ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಹೀನಾಯವಾಗಿ ಸೋತಿರುವುದರಿಂದ ಆ ಪಕ್ಷದ ಮತಗಳು ಬಿಜೆಪಿ ಬುಟ್ಟಿಗೆ ಬಿದ್ದು ಅವರ ಗೆಲುವಿಗೆ ನೆರವಾಯಿತು. ಮುಖ್ಯವಾಗಿ ಶಿರಾದಲ್ಲಿ ಜೆಡಿಎಸ್ ತನ್ನ ಮತಗಳನ್ನಾದರೂ ಉಳಿಸಿಕೊಂಡಿದ್ದರೆ ಖಂಡಿತ ಬಿಜೆಪಿ ಇಷ್ಟು ಸುಲಭದಲ್ಲಿ ಗೆಲ್ಲುತ್ತಿರಲಿಲ್ಲ.’

-masthmagaa.com

Contact Us for Advertisement

Leave a Reply