masthmagaa.com:
ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಂತೆಯೇ ಉತ್ತರಪ್ರದೇಶದ ಹತ್ರಾಸ್ ಎಂಬಲ್ಲೂ ಅಂಥದ್ದೇ ಘಟನೆ ನಡೆದಿದೆ. ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರ ಮತ್ತು ಚಿತ್ರಹಿಂಸೆಗೆ ಒಳಗಾಗಿದ್ದ 19 ವರ್ಷದ ಯುವತಿ ಚಿಕಿತ್ಸೆ ಫಲಿಸದೆ ನಿನ್ನೆ ದೆಹಲಿಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಈ ವಿಚಾರ ದೇಶವ್ಯಾಪಿ ಚರ್ಚೆಗೆ ಗ್ರಾಸವಾಗಿದ್ದು ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಅನ್ನೋ ಆಗ್ರಹ ಕೇಳಿಬಂದಿದೆ. ಕಳೆದ ವರ್ಷದ ಹೈದರಾಬಾದ್ ಅತ್ಯಾಚಾರ ಪ್ರಕರಣದಂತೆಯೇ ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕು ಅಂತ ನಟಿ ಕಂಗನಾ ರನಾವತ್ ಆಗ್ರಹಿಸಿದ್ದಾರೆ. ಹೈದ್ರಾಬಾದ್ ಪ್ರಕರಣದಲ್ಲಿ ಅತ್ಯಾಚಾರಿಗಳನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದರು.
ಮತ್ತೊಂದುಕಡೆ ಹತ್ರಾಸ್ ಅತ್ಯಾಚಾರ ಸಂತ್ರಸ್ತೆಯ ಅಂತ್ಯಸಂಸ್ಕಾರವನ್ನ ಪೊಲೀಸರು ಮಧ್ಯರಾತ್ರಿ 2.30ರ ಸುಮಾರಿಗೆ ನೆರವೇರಿಸಿದ್ದು ಕೂಡ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಕುಟುಂಬಸ್ಥರು ಬೆಳಗ್ಗೆ ಅಂತ್ಯಸಂಸ್ಕಾರ ಮಾಡ್ತೀವಿ ಅಂದ್ರೂ ಪೊಲೀಸರು ಬಿಡಲಿಲ್ಲ. ಅವರು ತರಾತುರಿಯಲ್ಲೇ ಅಂತ್ಯಸಂಸ್ಕಾರ ಮಾಡಿದ್ರು ಅಂತ ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ಜೊತೆಗೆ ನಮಗೆ ಸ್ಥಳೀಯ ಪೊಲೀಸರ ಮೇಲೆ ನಂಬಿಕೆ ಇಲ್ಲ. ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆ ನಡೆಯಬೇಕು ಅಂತ ಸಂತ್ರಸ್ತೆಯ ಕುಟುಂಬಸ್ಥರ ಆಗ್ರಹಿಸಿದ್ದಾರೆ. ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿರೋ ಪ್ರಧಾನಿ ಮೋದಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಜೊತೆ ಫೋನ್ ಮೂಲಕ ಮಾತನಾಡಿದ್ದು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಯುಪಿ ಸರ್ಕಾರ ಈ ಸಂಬಂಧ SIT ತಂಡವನ್ನ ರಚಿಸಿದ್ದು, 7 ದಿನದ ಒಳಗಾಗಿ ವರದಿ ನೀಡುವಂತೆ ಸೂಚಿಸಿದೆ.
-masthmagaa.com
Contact Us for Advertisement