masthmagaa.com:
ಕೊರೋನಾ ವೈರಸ್ ತಡೆಗಟ್ಟಲು ಕೇಂದ್ರ ಸರ್ಕಾರ ಹೇರಿದ್ದ ದೇಶವ್ಯಾಪಿ ಲಾಕ್ಡೌನ್ ಅನ್ನು ಏಪ್ರಿಲ್ 30ರವರೆಗೆ ವಿಸ್ತರಿಸಲಾಗಿದೆ. ಸೋಂಕಿತರು ಹಾಗೂ ಮೃತಪಡುವವರ ಸಂಖ್ಯೆ ದಿನೇದಿನೆ ಹೆಚ್ಚಾಗುತ್ತಿರುವ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದಕ್ಕೂ ಮೊದಲು ಮಾರ್ಚ್ 24ರಂದು ದೇಶವ್ಯಾಪಿ 21 ದಿನಗಳ ಲಾಕ್ಡೌನ್ ಹೇರಲಾಗಿತ್ತು. ಅದು ಏಪ್ರಿಲ್ 14ರಂದು ಅಂತ್ಯವಾಗಬೇಕಿತ್ತು.
ಇಂದು ಬೆಳಗ್ಗೆ ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದರು. ಈ ವೇಳೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಪಂಜಾಬ್ ಸಿಎಂ ಅಮರಿಂದರ್ ಸಿಂಗ್, ಒಡಿಶಾ ಸಿಎಂ ನವೀನ್ ಪಟ್ನಾಯಕ್ ಸೇರಿದಂತೆ ಹಲವು ರಾಜ್ಯದ ಮುಖ್ಯಮಂತ್ರಿಗಳು ಲಾಕ್ಡೌನ್ ವಿಸ್ತರಿಸುವಂತೆ ಪ್ರಧಾನಿಗೆ ಕೇಳಿಕೊಂಡಿದ್ದರು.
ಇದೀಗ ಈ ಬಗ್ಗೆ ಟ್ವೀಟ್ ಮಾಡಿರೋ ಅರವಿಂದ ಕೇಜ್ರಿವಾಲ್ ಏಪ್ರಿಲ್ 30ವರೆಗೆ ಲಾಕ್ಡೌನ್ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಅಂತ ಹೇಳಿದ್ದಾರೆ. ಇದಕ್ಕೂ ಮೊದಲು ಒಡಿಶಾ, ಪಂಜಾಬ್, ರಾಜಸ್ಥಾನಗಳು ಏಪ್ರಿಲ್ 30ವರೆಗೆ ಲಾಕ್ಡೌನ್ ವಿಸ್ತರಿಸಿದ್ದವು. ಸದ್ಯ ದೇಶದಲ್ಲಿ 7,447 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 239 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಜೊತೆಗೆ 643 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
-masthmagaa.com
Contact Us for Advertisement