masthmagaa.com:
ಇತ್ತೀಚೆಗೆ ಸುರಿದ ಭಾರಿ ಮಳೆಗೆ ತತ್ತರಿಸಿದ್ದ ಕರ್ನಾಟಕ, ತೆಲಂಗಾಣ ಮತ್ತು ಮಹಾರಾಷ್ಟ್ರದಲ್ಲಿ ಮತ್ತೆ ಭಾರಿ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ತೆಲಂಗಾಣದ ಕೆಲವೆಡೆ ಅಕ್ಟೋಬರ್ 19ರಿಂದ 22ರವರೆಗೆ ಗುಡುಗುಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಅದೇ ರೀತಿ ಮಹಾರಾಷ್ಟ್ರ ಕರಾವಳಿ ಭಾಗದ ರತ್ನಗಿರಿ ಮತ್ತು ಸಿಂಧುದುರ್ಗದಲ್ಲಿ ಭಾರಿ ವರ್ಷಧಾರೆಯಾಗುವ ಸಾಧ್ಯತೆ ಇದೆ ಅಂತ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಂದ್ಹಾಗೆ ಸಿಂಧುದುರ್ಗವು ಕರ್ನಾಟಕದ ಬೆಳಗಾವಿ ಜೊತೆ ಗಡಿಯನ್ನು ಹಂಚಿಕೊಂಡಿದೆ. ಹೀಗಾಗಿ ಅಲ್ಲಿ ಮಳೆಯಾದ್ರೆ ಇಲ್ಲಿ ಅದರ ಪರಿಣಾಮ ಕಾಣಬಹುದು.
ಜೊತೆಗೆ ಭಾರತೀಯ ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಉಪಗ್ರಹ ಚಿತ್ರದಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಅಂತ ತೋರಿಸಲಾಗಿದೆ. ಇದರ ಬೆನ್ನಲ್ಲೇ ಬೆಂಗಳೂರು, ರಾಮನಗರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ನಮ್ಮ ಪಕ್ಕದ ಕೇರಳ, ತಮಿಳುನಾಡು, ಆಂಧ್ರಪ್ರದೇಶದಲ್ಲೂ ವರ್ಷಧಾರೆಯಾಗುವ ಸಾಧ್ಯತೆ ಇದೆ.
-masthmagaa.com
Contact Us for Advertisement