masthmagaa.com:

ರಾಜ್ಯದಲ್ಲಿ ಮರಾಠ ಮತ್ತು ಲಿಂಗಾಯತ ಪ್ರಾಧಿಕಾರದ ಬಗ್ಗೆ ಚರ್ಚೆಗಳು ನಡೆಯುತ್ತಿರುವಾಗಲೇ ‘ಜಾತಿ ಆಧಾರಿತ ನಿಗಮ ಮತ್ತು ಪ್ರಾಧಿಕಾರಗಳು ಸಮಾಜ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ. ಬಡತನ ಅನ್ನೋದು ಜಾತಿ-ಧರ್ಮಗಳನ್ನ ಮೀರಿದ್ದು. ತಳ ಸಮುದಾಯದಲ್ಲಿ ಮಾತ್ರ ಬಡವರಿಲ್ಲ, ಮೇಲ್ಜಾತಿಗಳಲ್ಲೂ ಇದ್ದಾರೆ. ಇಂತಹ ಬಡತನ ನಿರ್ಮೂಲನೆ ಕಾರ್ಯಕ್ರಮ ವೈಜ್ಞಾನಿಕ ಅಧ್ಯಯನದ ಆಧಾರವಾಗಿರಬೇಕು’ ಅಂತ ವಿಪಕ್ಷ ನಾಯಕ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನ ಕಟುವಾಗಿ ಟೀಕಿಸಿದ್ದಾರೆ. ಅವರ ಟ್ವೀಟ್​ಗಳು ಇಲ್ಲಿವೆ ನೋಡಿ…

‘ಯಾವುದೇ ವೈಜ್ಞಾನಿಕ ಅಧ್ಯಯನಗಳಿಲ್ಲದೆ ಜಾತಿ ಆಧಾರಿತ ನಿಗಮ-ಪ್ರಾಧಿಕಾರ ಸ್ಥಾಪನೆ ಸಮಾಜ ವಿರೋಧಿ ಮಾತ್ರವಲ್ಲ, ಪ್ರಜಾಪ್ರಭುತ್ವ ವಿರೋಧಿ ತೀರ್ಮಾನ ಕೂಡ ಹೌದು. ಚುನಾವಣೆಗಳನ್ನ ಸಾಧನೆಯ ಬಲದಿಂದ ಗೆಲ್ಲಲಾಗದ ರಾಜ್ಯದ ಮತಿಹೀನ ಬಿಜೆಪಿ ಸರ್ಕಾರ ಇಂತಹ ಅಗ್ಗದ ತಂತ್ರ-ಕುತಂತ್ರಗಳನ್ನು ಮಾಡಿ ಸಮಾಜವನ್ನು ಒಡೆಯಲು ಹೊರಟಿದೆ.’

‘ಬಡತನ ನಿರ್ಮೂಲನೆಯ ಕಾರ್ಯಕ್ರಮಗಳು ವೈಜ್ಞಾನಿಕ ಅಧ್ಯಯನ ಆಧಾರಿತವಾಗಬೇಕು. ಮುಖ್ಯಮಂತ್ರಿಗಳು ಬಡತನ ನಿರ್ಮೂಲನೆಯ ಪ್ರಾಮಾಣಿಕ ಕಾಳಜಿ ಹೊಂದಿದ್ದರೆ ಈಗಾಗಲೇ ಅವರ ಮುಂದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಒಪ್ಪಿಕೊಂಡು ಕಾರ್ಯಕ್ರಮಗಳನ್ನು ರೂಪಿಸಲಿ.’

‘ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ನಮ್ಮ ವಿರೋಧ ಇಲ್ಲ. ಜಾತಿ-ಧರ್ಮಗಳನ್ನು ಮೀರಿದ್ದು ಬಡತನ. ತಳಸಮುದಾಯಗಳಲ್ಲಿ ಮಾತ್ರವಲ್ಲ ಮೇಲ್ಜಾತಿಗಳಲ್ಲಿಯೂ ಬಡವರಿದ್ದಾರೆ. ಎಲ್ಲ ಜಾತಿ-ಧರ್ಮಗಳ ಬಡವರ ಕಲ್ಯಾಣ ಕಾರ್ಯಕ್ರಮಗಳಿಗೆ ನನ್ನ ಸ್ವಾಗತವಿದೆ. ಕೇವಲ ರಾಜಕೀಯ ಲಾಭಕ್ಕಾಗಿ ನಡೆಸುವ ಇಂತಹ ಕ್ಷುಲ್ಲಕ ಬುದ್ದಿಯ ಕಸರತ್ತುಗಳನ್ನು ಖಂಡಿಸುತ್ತೇನೆ.’

‘ಗಡಿಭಾಗದಲ್ಲಿ ಕನ್ನಡ ಮತ್ತು ಮರಾಠಿಗರ ನಡುವೆ ಆಗಾಗ ಸಂಘರ್ಷ ನಡೆದರೂ, ರಾಜ್ಯಾದ್ಯಂತ ಎರಡೂ ಸಮುದಾಯಗಳು ಸೌಹಾರ್ದತೆಯಿಂದ ಬದುಕುತ್ತಿವೆ. ಸರ್ಕಾರ ಮರಾಠ ಅಭಿವೃದ್ದಿ ಪ್ರಾಧಿಕಾರ ಘೋಷಿಸಿ ಅನಗತ್ಯವಾಗಿ ಕನ್ನಡಿಗರನ್ನು ಕೆರಳಿಸುವ ಮೂರ್ಖತನ ತೋರಿದೆ. ಇದರಿಂದಾಗಿ ರಾಜ್ಯದ ಶಾಂತಿ-ಸುವ್ಯವಸ್ಥೆಗೆ ಭಂಗ ಉಂಟಾದಲ್ಲಿ ಅದಕ್ಕೆ ಮುಖ್ಯಮಂತ್ರಿಗಳೇ ಹೊಣೆ.’

‘ನಾನು ಮುಖ್ಯಮಂತ್ರಿಯಾಗಿ ಅನುಷ್ಠಾನಗೊಳಿಸಿರುವ ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಕಾರ್ಯಕ್ರಮಗಳು ನಿರ್ದಿಷ್ಠ ಜಾತಿ-ಧರ್ಮಕ್ಕೆ ಸೀಮಿತವಾದುದಲ್ಲ. ಇವೆಲ್ಲವೂ ಸರ್ವಾಜನಾಂಗದ ಬಡವರ ಕಲ್ಯಾಣ ಕಾರ್ಯಕ್ರಮಗಳು. ನಾನು ಜಾತಿ-ಜಾತಿ ನಡುವೆ ವೈಷಮ್ಯ ಹುಟ್ಟಿಸುವ ಕೆಲಸ ಮಾಡಿಲ್ಲ.’

‘ಮೀಸಲಾತಿ, ಸಾಮಾಜಿಕ ನ್ಯಾಯದ ಬಗ್ಗೆ ನಾವು ಮಾತನಾಡಿದಾಗ ನಮ್ಮನ್ನು ಜಾತಿವಾದಿಗಳೆಂದು ಟೀಕಿಸುವ, ಹಂಗಿಸುವ ಬಿಜೆಪಿ ಈಗ ಮಾಡುತ್ತಿರುವುದೇನು? ಜಾತಿ-ಜಾತಿ ನಡುವೆ ಮಾತ್ರವಲ್ಲ ಭಾಷೆ-ಭಾಷೆ ನಡುವೆ ಕೂಡಾ ಜಗಳ ಹುಟ್ಟುಹಾಕುತ್ತಿದೆ. ಇಂತಹ ತುಘಲಕ್ ನಿರ್ಧಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ.’

‘ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಗ್ಯತೆ ಇಲ್ಲ. ವೃದ್ಧಾಪ್ಯವೇತನ, ವಿಧವಾ ವೇತನ, ಅಂಗವಿಕಲ ವೇತನಕ್ಕೆ ದುಡ್ಡಿಲ್ಲ, ಅತಿವೃಷ್ಟಿಯಿಂದ ಕಷ್ಟ-ನಷ್ಟಕ್ಕೀಡಾಗಿರುವ ಜನ ಬೀದಿಯಲ್ಲಿದ್ದಾರೆ, ಕೋರೊನಾ ಸೋಂಕಿನಿಂದ ಜನ ಸಾಯುತ್ತಿದ್ದಾರೆ. ಇವೆಲ್ಲಕ್ಕೂ ಸರ್ಕಾರದ ಬಳಿ ಹಣ ಇಲ್ಲ, ಜಾತಿ ನಿಗಮ-ಪ್ರಾಧಿಕಾರಕ್ಕೆ ನೂರಾರು ಕೋಟಿ ಎಲ್ಲಿಂದ ಬಂತು?’

-masthmagaa.com

Contact Us for Advertisement

Leave a Reply