ಕಾವೇರಿ ನೀರು ವಿವಾದ, ಮತ್ತೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುತ್ತೇವೆ: ಸಿದ್ದು

masthmagaa.com:

ರಾಜ್ಯದಲ್ಲಿ ಕಾವೇರಿ ಹೋರಾಟಗಳು ಮುಂದುವರೆದಿವೆ. ಇದೀಗ ತಮಿಳುನಾಡಿಗೆ ನೀರು ಬಿಡುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ಇಂದು ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿದ್ದು, ಇವರು ಡಿಎಂಕೆ ಏಜೆಂಟ್‌ಗಳು ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತಾಡಿರುವ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ, ನಮ್ಮ ಬಹುತೇಕ ಎಲ್ಲಾ ಜಲಾಶಯಗಳಲ್ಲಿ ನೀರಿಲ್ಲ. ಕುಡಿಯುವ ಉದ್ದೇಶಕ್ಕೂ ಇರುವ ನೀರು ನಮಗೆ ಸಾಕಾಗುತ್ತಿಲ್ಲ. ಈ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದ್ದು, ಪ್ರಧಾನಿ ಇದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಅಂತ ಹೇಳಿದ್ದಾರೆ. ಜೊತೆಗೆ ಸಿಎಂ ಹಾಗೂ ಡಿಸಿಎಂ ತಮಿಳುನಾಡಿನ ಏಜೆಂಟರಂತೆ ವರ್ತಿಸುತ್ತಿರುವುದರಿಂದ ಕರ್ನಾಟಕ ಬಿಕ್ಕಟ್ಟು ಎದುರಿಸುತ್ತಿದೆ ಅಂತ ಆರೋಪಿಸಿದ್ದಾರೆ. ಇತ್ತ ಕಾವೇರಿ ನೀರು ಬಿಡುವಂತೆ ಪ್ರಾಧಿಕಾರ ನೀಡಿರೋ ಆದೇಶದ ವಿರುದ್ದ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸ್ತೀವಿ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಕ್ಟೋಬರ್ 15ರವರೆಗೆ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಬಿಡಲು ಕಾವೇರಿ ಪ್ರಾಧಿಕಾರ ಆದೇಶಿಸಿದೆ. ನಾನು ವಕೀಲರೊಂದಿಗೆ ಮಾತನಾಡಿದ್ದೇನೆ. ಅವರು ಈ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಸೂಚಿಸಿದ್ದಾರೆ ಅಂತ ಹೇಳಿದ್ದಾರೆ. ಅತ್ತ ಕಾವೇರಿ ನದಿ ವಿಚಾರವಾಗಿ ಸೆಪ್ಟೆಂಬರ್‌ 29ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಹಲವು ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ. ಜೊತೆಗೆ ಕನ್ನಡ ಚಿತ್ರರಂಗ ಕೂಡ ಕರ್ನಾಟಕ ಬಂದ್‌ಗೆ ಬೆಂಬಲ ಘೋಷಿಸಿದೆ.

-masthmagaa.com

Contact Us for Advertisement

Leave a Reply